ಪರಿಶಿಷ್ಟ ಸಮುದಾಯಗಳು ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿ ಬಿಜೆಪಿಯಿಂದ ನಾಶವಾಗುತ್ತಿದೆ- ಎಲ್.ಹನುಮಂತಯ್ಯ ಆರೋಪ

ಬಂಟ್ವಾಳ : ಕಾಂಗ್ರೆಸ್ ಪಕ್ಷವು ಪರಿಶಿಷ್ಟ ಸಮುದಾಯಗಳು ಹಾಗೂ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ. ಆದರೆ ಕಾಂಗ್ರೇಸ್ ಅವಧಿಯಲ್ಲಿ ಆರಂಭವಾದ ಸಾಕಷ್ಟು ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಮೂಲಕ ಬಿಜೆಪಿಯು ಪರಿಶಿಷ್ಟ ಸಮುದಾಯಗಳು ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ನಾಶಗೊಳಿಸುತ್ತಿದೆ. ಇದರಿಂದ ತಳಸಮುದಾಯಗಳಿಗೆ ದೊಡ್ಡ ಅನ್ಯಾಯವಾಗುತ್ತಿದ್ದು ಇದನ್ನು ತಡೆಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕಾಗಿದೆ ಎಂದು ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ ಹೇಳಿದ್ದಾರೆ.

ಬಂಟ್ವಾಳ ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಘಟಕಗಳ ವತಿಯಿಂದ ಬಿ.ಸಿ.ರೋಡ್ ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಐಕ್ಯತಾ ಸಮಾವೇಶದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು
ಯಾವ ಸಂವಿಧಾನ ನಮ್ಮನ್ನು ರಕ್ಷಿಸುತ್ತಿದೆಯೋ ಅಂತಹ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಬಿಜೆಪಿಗರು ಚಿಂತಿಸುತ್ತಿದ್ದಾರೆ, ಅದನ್ನು ಒಂದೇ ಬಾರಿ ಬದಲಾಯಿಸಲು ಸಾಧ್ಯವಿಲ್ಲವೆಂದು ಹಂತ ಹಂತವಾಗಿ ದುರ್ಬಲಗೊಳಿಸುತ್ತಿದ್ದಾರೆ. ಇದರಿಂದ ಜನಸಾಮಾನ್ಯರ ಬದುಕುವ ಹಕ್ಕನ್ನು ಕಸಿಯುತ್ತಿದ್ದು ಜನರು ಈ ಬಗ್ಗೆ ಜಾಗೃತರಾಗಿ ಚುನಾವಣೆಯಲ್ಲಿ ಇಂತವರಿಗೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದರು

.

ಸಜ್ಜನ ರಾಜಕಾರಣಿ, ಜನಸೇವೆ ಮಾಡಲು ಯೋಗ್ಯವಾದ ಜನನಾಯಕ, ದುರ್ಬಲ ವರ್ಗದ ಶ್ರೇಯೋಭಿವೃದ್ಧಿಗಾಗಿ ನಿರಂತರ ಶ್ರಮಿಸುತ್ತಿರುವ ಬಿ.ರಮಾನಾಥ ರೈಯವರನ್ನು ಜನತೆ ಬೆಂಬಲಿಸಬೇಕಾಗಿದೆ ಎಂದು ಹನುಮಂತಯ್ಯ ಹೇಳಿದರು.

ಸಂವಿಧಾನ ಉಳಿಸಲು ಕಾಂಗ್ರೆಸ್ ಬೆಂಬಲಿಸಿ:

ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸಮಾವೇಷ ಉದ್ಘಾಟಿಸಿದರು. ಸ್ವಾತಂತ್ರ್ಯ, ಸಹೋದರತೆಯ ಮೌಲ್ಯಗಳ ಮೂಲಕ ಸಂವಿಧಾನ ನಮಗೆ ಘನತೆಯನ್ನು ನೀಡಿದೆ. ಅಂತಹ ಸಂವಿಧಾನದಡಿ ಸಾಕಷ್ಟು ಕಾನೂನುಗಳನ್ನು ಮಾಡಿ ದೇಶದ ಪ್ರಗತಿಯಲ್ಲಿ ಕಾಂಗ್ರೆಸ್ ದೊಡ್ಡ ಕೊಡುಗೆಗಳನ್ನು ನೀಡಿದೆ. ಆದರೆ ಬಿಜೆಪಿಯಿಂದ ಸಂವಿಧಾನಕ್ಕೆ ಅಪಾಯ ಎದುರಾಗಿದ್ದು ಕಾಂಗ್ರೆಸ್ ಅನ್ನು ಗೆಲ್ಲಿಸಿದರೆ ಮಾತ್ರ ಸಂವಿಧಾನದ ಗೌರವವನ್ನು ಕಾಪಾಡಲು ಸಾಧ್ಯ ಎಂದು ಅವರು ಹೇಳಿದರು.

ದೀನ ದುರ್ಬಲರ ಸೇವೆಗೆ ಸದಾ ಬದ್ಧ-ರೈ

ಮಾಜಿ ಸಚಿವ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಿದ್ದರು.
ತನ್ನ ಅಧಿಕಾರಾವಧಿಯಲ್ಲಿ ಎಲ್ಲಾ ವರ್ಗಗಳ ಜನರನ್ನು ಜೊತೆಯಾಗಿ ಕೊಂಡೊಯ್ದು ಸಮಾನ ಸೇವೆ ಸಲ್ಲಿಸಿದ್ದೇನೆ. ಅಧಿಕಾರ ಇದ್ದಾಗಲೂ, ಇಲ್ಲದಿದ್ದಾಗಲೂ ದುರ್ಬಲ ವರ್ಗದ ಶ್ರೇಯೋಭಿವೃದ್ಧಿಗಾಗಿ ನಿರಂತರ ಶ್ರಮಿಸಿದ್ದು ಮುಂದೆಯೂ ಪರಿಶಿಷ್ಟ ಸಮುದಾಯಗಳು ಮತ್ತು ಹಿಂದುಳಿದ ವರ್ಗಗಳ ಹಿತ ಕಾಯಲು ಬದ್ಧನಾಗಿದ್ದೇನೆ ಎಂದು ಅವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ದಲಿತರ ಬಹುಬೇಡಿಕೆಯಾದ ಡಿ.ಸಿ. ಮನ್ನಾ ಭೂಮಿ ಸಮಸ್ಯೆ ನಿವಾರಣೆಗೆ ಕಾಂಗ್ರೆಸ್ ಬದ್ಧವಾಗಿದೆ. ಈ ಬಗ್ಗೆ ಪಕ್ಷದ ಪ್ರಣಾಳಿಕೆಯಲ್ಲಿಯೂ ಸೇರ್ಪಡೆಗೊಳಿಸಲಾಗಿದೆ. ಮುಂದಿನ ಬಾರಿ ನಮ್ಮ ಸರಕಾರ ಬಂದಾಗ ಈ ಬಗ್ಗೆ ಸೂಕ್ತ ಕಾನೂನು ರಚಿಸಿ ಸಮಸ್ಯೆ ಪರಿಹರಿಸಲಾಗುವುದು ಎಂದು ರಮಾನಾಥ ರೈ ಭರವಸೆ ನೀಡಿದರು.
ರಾಜ್ಯ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಆರ್. ಧರ್ಮಸೇನ ಮಾತನಾಡಿದರು. ದ.ಕ. ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಜನಾರ್ಧನ ಚೆಂಡ್ತಿಮಾರ್ ಪ್ರಸ್ತಾವನೆ ಮಾಡಿದರು. ಸುರೇಶ್ ಪಿ. ಬಿ. ಸ್ವಾಗತಿಸಿದರು. ಚಂದ್ರಪ್ಪ ಮಾಸ್ತರ್ ಮತ್ತು ರಾಜೀವ್ ಕಕ್ಯಪದವು ಕಾರ್ಯಕ್ರಮ ನಿರೂಪಿಸಿದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಚಂದ್ರಹಾಸ ನಾಯ್ಕ್ ವಂದಿಸಿದರು.
ಕಾರ್ಯಕ್ರಮದಲ್ಲಿ ನಿತಿನ್ ಕುಲಾಲ್ ಅಲ್ಲಿಪಾದೆ, ಸೀತಾರಾಮ ಪೂಜಾರಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಶೇಖರ್ ಕುಕ್ಕೇಡಿ, ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾಧ್ಯಕ್ಷ ನಾರಾಯಣ ನಾಯ್ಕ್, ಕೆ.ಪಿ.ಸಿ.ಸಿ ಸದಸ್ಯ ಡಾ. ರಘು, ದ.ಕ. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಸೋಮನಾಥ, ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಸಂಚಾಲಕಿ ಸರೋಜಿನಿ, ಮಹಾನಗರ ಪಾಲಿಕೆ ಮಾಜಿ ಕಾರ್ಪೊರೇಟರ್ ಅಪ್ಪಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಜಯ ಕುಮಾರ್, ಐಕ್ಯತಾ ಸಮಾವೇಶದ ಸಂಚಾಲಕರುಗಳಾದ ಪಿಯುಸ್ ಎಲ್. ರಾಡ್ರಿಗಸ್, ಎಂ.ಎಸ್. ಮುಹಮ್ಮದ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಅಣ್ಣು ಖಂಡಿಗ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಚನ್ನಪ್ಪ ನಾಯ್ಕ್, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಪ್ರೀತಮ್ ರಾಜ್ ದ್ರಾವಿಡ, ಬಂಟ್ವಾಳ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಚಂದ್ರಹಾಸ ನಾಯ್ಕ್, ಪಕ್ಷದ ಪ್ರಮುಖರುಗಳಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ಪುತ್ತೂರು ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಮಹಾಲಿಂಗ ನಾಯ್ಕ್, ಕೆಪಿಸಿಸಿ ಸದಸ್ಯ ನಾಗರಾಜ್ ಲಾಯಿಲ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಬೀರ್ ಸಿದ್ಧಕಟ್ಟೆ, ಪ್ರಚಾರ ಸಮಿತಿ ಸಂಚಾಲಕ ಉಮೇಶ್ ಸಪಲ್ಯ ಮೊದಲಾದವರಿದ್ದರು. ಕಾರ್ಯಕ್ರಮಕ್ಕೆ ಮುನ್ನ ಬಿ.ಸಿ.ರೋಡು ಶ್ರೀ ರಕ್ತೇಶ್ವರೀ ದೇವಸ್ಥಾನದ ಬಳಿಯಿಂದ ಮೆರವಣಿಗೆ ನಡೆಯಿತು. ಅಪಾರ ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದರು.

ವರದಿ:ಗೋಪಾಲ ಅಂಚನ್
ಸಂಪಾದಕರು:
ಯುವಧ್ವನಿ ನ್ಯೂಸ್ ಕರ್ನಾಟಕ
ಮೊ:9449104318