ಸಿದ್ಧಕಟ್ಟೆ ಸಹಕಾರ ಸಂಘಕ್ಕೆ 1.68 ಕೋಟಿ ರೂ. ಲಾಭ-ಪ್ರಭಾಕರ ಪ್ರಭು( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಸಿದ್ಧಕಟ್ಟೆ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2023-24ನೇ ಸಾಲಿನಲ್ಲಿ ಒಟ್ಟು 445.45 ಕೋಟಿ ವ್ಯವಹಾರ ನಡೆಸಿ , 1.68 ಕೋಟಿ ಲಾಭ ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಪ್ರಭಾಕರ ಪ್ರಭು ಹೇಳಿದ್ದಾರೆ. ಸೆ.21ರಂದು ವಾರ್ಷಿಕ ಮಹಾಸಭೆ ನಡೆಯುವ ಹಿನ್ನೆಲೆಯಲ್ಲಿ ಬ್ಯಾಂಕಿನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಬ್ಯಾಂಕ್ ಸಾಧನೆಯ ಬಗ್ಗೆ ವಿವರಿಸಿದರು.
ಸಂಘವು 1947ರಲ್ಲಿ ಆಗಿನ ಸಹಕಾರಿ ಬಂಧುಗಳ ನೆರವಿನಿಂದ ಶ್ರೀ ಬಿ. ಕೃಷ್ಣ ರೈ ರವರ ಅಧ್ಯಕ್ಷತೆಯಲ್ಲಿ ಸ್ಥಾಪಿಸಲಾಗಿದ್ದು, ಸಂಘವು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮ ಸೇರಿದಂತೆ ಬಂಟ್ವಾಳ ತಾಲೂಕಿನ 7 ಗ್ರಾಮಗಳೊಂದಿಗೆ ಒಟ್ಟಾರೆ 8 ಗ್ರಾಮಗಳ ವ್ಯಾಪ್ತಿಯನ್ನು ಒಳಗೊಂಡಿದ್ದು ,ಆಡಳಿತ ಮಂಡಳಿಯ ನಿರ್ದೇಶಕರ, ಸಿಬ್ಬಂದಿಗಳ ಹಾಗೂ ಸದಸ್ಯರ ಸಂಪೂರ್ಣ ಸಹಕಾರದೊಂದಿಗೆ ಎಲ್ಲರಿಗೂ ತೃಪ್ತಿಕರವಾದ ಸೇವೆಯನ್ನು ನೀಡುತ್ತಾ ಬಂದಿದೆ. ಕಳೆದ 77 ವರ್ಷಗಳಿಂದ ಕಾರ್ಯಚರಿಸುತ್ತಿದ್ದು,ಅಭಿವೃದ್ದಿಯ ಪಥದಲ್ಲಿ ಮುನ್ನಡೆಯುತ್ತಿದೆ ಎಂದು ಅವರು ಹೇಳಿದರು.

2023-24 ನೇ ಸಾಲಿನ ವರ್ಷಾಂತ್ಯಕ್ಕೆ 54.39 ಕೋಟಿ ಠೇವಣಿ ಹೊಂದಿದ್ದು , ವರದಿ ವರ್ಷದಲ್ಲಿ ವಿವಿಧ ಉದ್ದೇಶಗಳಿಗೆ ಒಟ್ಟು 55 ಕೋಟಿ ಸಾಲ ವಿತರಿಸಲಾಗಿದ್ದು ,ಹೊರ ಬಾಕಿ ಸಾಲವು 98.24 ಕೋಟಿ ಆಗಿದ್ದು , ವಿತರಿಸಿದ ಸಾಲದಲ್ಲಿ ಶೇ 98% ರಷ್ಟು ವಸೂಲಾತಿಯಾಗಿರುತ್ತದೆ. ನಮ್ಮ ಸಂಘವು ಕಳೆದ ಹಲವಾರು ವರ್ಷಗಳಿಂದ ಅಡಿಟ್ ವರದಿಯಲ್ಲಿ “ಎ” ಗ್ರೇಡ್ ನ್ನು ನಿರಂತರವಾಗಿ ಕಾಯ್ದುಕೊಂಡು ಬರಲಾಗಿದೆ ಎಂದು ಪ್ರಭು ವಿವರಿಸಿದರು.

ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಲ್ಲಿ ಜಿಲ್ಲಾ ಮಟ್ಟದಲ್ಲಿಯೇ ಗರಿಷ್ಠ ಸಾಧನೆ :

2023-24 ನೇ ಸಾಲಿನಲ್ಲಿ 1771 ರೈತರು 2037 ಎಕ್ರೆ ಜಮೀನಿಗೆ ಸಂಬಂಧಿಸಿದಂತೆ 52.74 ಲಕ್ಷ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಸಂಬಂಧಿಸಿ ರೈತರಿಂದ ಪ್ರೀಮಿಯಂ ಪಾವತಿಸಲಾಗಿದೆ. ಕಳೆದ ವರ್ಷ ನಮ್ಮ ಸಂಘದ ವ್ಯಾಪ್ತಿಯ ಸದಸ್ಯರು ಸುಮಾರು 8-10 ಕೋಟಿ ಬೆಳೆವಿಮೆ ಪರಿಹಾರ ಪಡೆದಿರುತ್ತಾರೆ . ಇದರಿಂದ ನಮ್ಮ ಸಂಘವು ಜಿಲ್ಲೆಯಲ್ಲಿ ಮುಂಚೂಣಿಯಲ್ಲಿರುವ ಬೆರಳೆಣಿಕೆಯ ಸಹಕಾರಿ ಸಂಘಗಳಲ್ಲಿ ಒಂದಾಗಿದೆ ಎಂದರು.

ಪ್ರತಿಭಾ ಪುರಸ್ಕಾರ:

ಸಂಘದ ಸದಸ್ಯರ ಪ್ರತಿಭಾನ್ವಿತ SSLC ಹಾಗೂ PUC ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ.

ರೈತನಿಧಿ” ಯೋಜನೆ:

ಸಂಘದಿಂದ ಬೆಳೆ ಸಾಲ ಪಡೆದ ಸದಸ್ಯರು ಮರಣ ಹೊಂದಿದ್ದಲ್ಲಿ, ಸದ್ರಿಯವರ ಕುಟುಂಬಕ್ಕೆ ಸಂಘದ ವತಿಯಿಂದ ನೆರವಾಗುವ ದೃಷ್ಠಿಯಲ್ಲಿ ‘ರೈತನಿಧಿ” ಯೋಜನೆಯ ಮೂಲಕ ಆರ್ಥಿಕವಾಗಿ ಸಹಕಾರ ನೀಡಲಾಗುತ್ತಿದೆ.

ಗೌರವಾರ್ಪಣೆ:

ಸಂಘದ ವ್ಯಾಪ್ತಿಯ ರಾಯಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಅತ್ಯುತ್ತಮ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿರುವ ಡಾI ಮನೋನ್ಮಣಿರವರನ್ನು, ಮೆಸ್ಕಾಂ ಸಿದ್ದಕಟ್ಟೆ ಶಾಖೆಯಲ್ಲಿ ಹಲವಾರು ವರ್ಷಗಳಲ್ಲಿ ಲೈನ್ ಮ್ಯಾನ್ ಆಗಿದ್ದುಕೊಂಡು ,ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ , ಪದೋನ್ನತಿಗೊಂಡು ವರ್ಗಾವಣೆಗೊಂಡ ವೆಂಕಟೇಶ್ ಹಾಗೂ ಜಾನಪದ ಕ್ಷೇತ್ರದಲ್ಲಿ ದೈವಾರಾಧನೆಯಲ್ಲಿ ಗಣನೀಯ ಸೇವೆ ಸಲ್ಲಿಸಿ, ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಶ್ರೀ ಮಾಧವ ಪರವ ,ಮಂಚಕಲ್ಲು ಇವರಿಗೆ ಸಂಘದ ವತಿಯಿಂದ ಕಾರ್ಯಕ್ರಮ ಏರ್ಪಡಿಸಿ ಗೌರವಿಸಲಾಗಿದೆ.

ಪ್ರಯಾಣಿಕರ ಬಸ್ಸು ತಂಗುದಾಣ ಮತ್ತು ರಿಕ್ಷಾ ನಿಲ್ದಾಣ:

ಸಂಘದ ಸದಸ್ಯರ ಬೇಡಿಕೆಗೆ ಅನುಗುಣವಾಗಿ ಸಿದ್ದಕಟ್ಟೆ ಪೇಟೆಯ ಶ್ರೀ ರಾಮನಗರದಲ್ಲಿ ಪ್ರಯಾಣಿಕರಿಗೆ ಅನೂಕೂಲವಾಗುವಂತೆ ಸುಸಜ್ಜಿತವಾದ ಪ್ರಯಾಣಿಕರ ಬಸ್ಸು ತಂಗುದಾಣ , ಹಾಗೂ ರಿಕ್ಷಾ ಚಾಲಕ –ಮಾಲಕರಿಗೆ ಸಹಕರಿಸುವ ನಿಟ್ಟಿನಲ್ಲಿ ಆಟೋ ರಿಕ್ಷಾ ನಿಲ್ದಾಣವನ್ನು ಸಂಘದ ವತಿಯಿಂದ ನಿರ್ಮಿಸಿ ಕೊಡಲಾಗಿದ್ದು ಸಂಘವು ಸಾರ್ವಜನಿಕರ ಪ್ರಶಂಸೆಗೆ ವ್ಯಕ್ತವಾಗಿದೆ.

ನ್ಯಾಯಬೆಲೆ ಅಂಗಡಿ:

ನ್ಯಾಯಬೆಲೆ ಅಂಗಡಿಯ ಮೂಲಕ ಸಂಘದಲ್ಲಿ ಪಡಿತರ ಸಾಮಾಗ್ರಿಗಳನ್ನು ಸಮರ್ಪಕವಾಗಿ ವಿತರಿಸಲಾಗಿದ್ದು,ಸಂಘದಲ್ಲಿ “ನೇತಾಜಿ ಬಹುಪಯೋಗಿ ಸೇವಾಕೇಂದ್ರ”ದ ಹೆಸರಿನಲ್ಲಿ ಗೋದಾಮು ಕಟ್ಟಡ ಇದ್ದು,ಇದರ ಮೂಲಕ ರಾಸಾಯನಿಕ ಗೊಬ್ಬರ ,ಸಾವಯವ ಗೊಬ್ಬರ,ಮೈಲುತ್ತುತ್ತು , ಸುಣ್ಣ, ಸೇರಿದಂತೆ ರೈತರಿಗೆ ಬೇಕಾಗುವ ಉತ್ತಮ ಗುಣಮಟ್ಟದ ಕೃಷಿ ಉಪಯುಕ್ತ ಉಪಕರಣಗಳು ಹಾಗೂ ಗೃಹೋಪಯೋಗಿ ವಸ್ತುಗಳನ್ನು ಯೋಗ್ಯ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ .

ಶಾಖೆಗಳು:

ಸಿದ್ದಕಟ್ಟೆ ಪ್ರಧಾನ ಕಛೇರಿ ಸೇರಿದಂತೆ,ಸಂಘವು ಆರಂಬೋಡಿ, ರಾಯಿ, ಮಾವಿನಕಟ್ಟೆ ಎಂಬಲ್ಲಿ ಒಟ್ಟು ಮೂರು ಶಾಖೆಗಳನ್ನು ಹೊಂದಿದ್ದು , ಸಿ ಸಿ ಕ್ಯಾಮೆರ ಹಾಗೂ ಸೈರನ್ ವ್ಯವಸ್ಥೆ ಕಲ್ಪಿಸಲಾಗಿದ್ದು ಗ್ರಾಹಕರಿಗೆ ಅನೂಕೂಲವಾಗುವ ನಿಟ್ಟಿನಲ್ಲಿ RTGS , NEFT ವ್ಯವಸ್ಥೆಯೊಂದಿಗೆ ಕ್ಯೂ ಆರ್ ಕೋಡ್ ವ್ಯವಸ್ಥೆ ಮಾಡಲಾಗಿದೆ,.

ರೈತ ಸಭಾಂಗಣ:

ಸಾರ್ವಜನಿಕ ಕಾರ್ಯಕ್ರಮಕ್ಕೆ ಅನೂಕೂಲವಾಗುವಂತೆ ಸಂಘದ ಸ್ಥಾಪಕ ಅಧ್ಯಕ್ಷ ಬೆಳ್ಳಿಪ್ಪಾಡಿ ಕೃಷ್ಣ ರೈ ಅವರ ಸವಿನೆನಪಿಗಾಗಿ ಅವರ ಹೆಸರಿನಲ್ಲಿ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಾರ್ವಜನಿಕರ ಕಾರ್ಯಕ್ರಮಗಳಿಗೆ ಸಭಾಂಗಣವನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದು ಪ್ರಭಾಕರ ಪ್ರಭು ವಿವರಿಸಿದರು.

ನಿರ್ದೇಶಕರಾದ ಸಂದೇಶ್ ಶೆಟ್ಟಿ ಪೊಡುಂಬ, ರಾಜೇಶ್ ಶೆಟ್ಟಿ ಕೊನೆರಬೆಟ್ಟು , ಉಮೇಶ್ ಗೌಡ, ದೇವರಾಜ್ ಸಾಲ್ಯಾನ್, ಹರೀಶ್ ಆಚಾರ್ಯ, ಶ್ರೀಮತಿ ಮಂದಾರತಿ ಎಸ್ ಶೆಟ್ಟಿ, ವೃತಿಪರ ನಿರ್ದೇಶಕ ಮಾಧವ ಶೆಟ್ಟಿಗಾರ್, ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಆರತಿ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು